DK Shivakumar:‌ ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವಿಗೆ ಇದೇ ಕಾರಣ: ಡಿ ಕೆ ಶಿವಕುಮಾರ್‌

ರಾಮನಗರ, ನವೆಂಬರ್‌ 25: ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮೀ ಯೋಜನೆಯನ್ನೇ ನಕಲು ಮಾಡಿ ‘ಮಾಝಿ ಲಡಕಿ ಬಹಿನ್ ಯೋಜನಾ’ ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು. ನಾವು ಮಹಾಲಕ್ಷ್ಮಿ ಎನ್ನುವ ಹೆಸರಿಟ್ಟು 3,000 ಸಾವಿರ ಕೊಡುವುದಾಗಿ ಭರವಸೆ ನೀಡಿದ್ದೆವು. ಆದರೆ ಅಲ್ಲಿನ ಬಿಜೆಪಿ ಮೈತ್ರಿ ಸರ್ಕಾರ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಹಣ ನೀಡಿದ ಪರಿಣಾಮ ನಮಗಿಂತ ಅವರಿಗೆ ಹೆಚ್ಚು ಮತಗಳು ಬಂದವು ಎಂದು ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಕನಕಪುರದಲ್ಲಿ ಭಾನುವಾರ ನಡೆದ ಕನಕಾಂಬರಿ ಮಹಿಳಾ ಒಕ್ಕೂಟದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಣ್ಣು ಪ್ರಗತಿ ಹೊಂದಿದರೆ ಒಂದು ಕುಟುಂಬ ಪ್ರಗತಿ ಹೊಂದಿದಂತೆ. ರಾಜ್ಯ, ಹಳ್ಳಿ ಪ್ರಗತಿಯಾದಂತೆ. ಆದ ಕಾರಣಕ್ಕೆ ನಮ್ಮ ಗ್ಯಾರಂಟಿ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿರುವಂತೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ ಸಂಬಂಧಿಕರನ್ನು ನಿಲ್ಲಿಸುತ್ತಿದ್ದಾರೆ. ಸಾಮಾನ್ಯ ಮಹಿಳೆಯರು ಅಧಿಕಾರದ ಗದ್ದುಗೆ ಇರಲು ಮುಂದಕ್ಕೆ ಬರಬೇಕು. ಸಂಸತ್ತಿನಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ದೊರೆತಿದೆ. ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಶೇಕಡ 33ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ನೀಡಬೇಕಾಗಬಹುದು. ಅದಕ್ಕಾಗಿ ಸಾಮಾನ್ಯ ಮಹಿಳೆಯರು ಈಗಿನಿಂದಲೇ ತಮ್ಮಲ್ಲಿರುವ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಿ ಎಂದು ಹೇಳಿದರು.

ಎಸ್ಎಂ. ಕೃಷ್ಣ ಅವರ ಸಂಪುಟದಲ್ಲಿ ನಾನು ಸಹಕಾರ ಸಚಿವನಾಗಿದ್ದೆ. ಆಗ ಈ ಸ್ತ್ರೀ ಶಕ್ತಿ ಸಂಘಗಳಿಗೆ ಮುನ್ನುಡಿ ಬರೆದಿದ್ದೆ ನಾವು. ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಡಿಸಿಸಿ ಬ್ಯಾಂಕ್ ನೇತೃತ್ವದಲ್ಲಿ ಸ್ವಸಹಾಯ ಗುಂಪುಗಳಿದ್ದವು, ಇವುಗಳನ್ನೇ ಸ್ತ್ರೀಶಕ್ತಿ ಸಂಘಗಳೆಂದು ಪರಿವರ್ತಿಸಿ, ಸಚಿವರಾಗಿದ್ದ ಮೋಟಮ್ಮ ಅವರಿಗೆ ನೇತೃತ್ವ ನೀಡಲಾಯಿತು.

ಸ್ತ್ರೀ ಶಕ್ತಿ ಸಂಘಗಳು ಮಾಡಿದ ಪರಿಣಾಮವಾಗಿ ಹೆಣ್ಣು ಮಕ್ಕಳು ಮನೆಯಲ್ಲಿ ಇರುತ್ತಿಲ್ಲ ಇಂದು ಅನೇಕ ನಾಯಕರು ನನಗೆ ಬೈದರು. ಮನೆಯಲ್ಲಿ ಹೆಣ್ಣಿಗೆ ಆರ್ಥಿಕವಾಗಿ ಶಕ್ತಿ ಕೊಡಬೇಕು ಎಂದು ಈ ಕಾರ್ಯಕ್ರಮಕ್ಕೆ ಬೆನ್ನೆಲುಬಾಗಿ ನಿಂತೆ. ಹೆಣ್ಣು ಕುಟುಂಬದ ಕಣ್ಣು. ಕುಟುಂಬದಲ್ಲಿ ಹೆಣ್ಣಿನ ಮನಸ್ಥಿತಿ, ಪರಿಸ್ಥಿತಿ ಆರೋಗ್ಯವಾಗಿ ಇದ್ದರೆ, ನಾವೆಲ್ಲರೂ ಆರೋಗ್ಯವಾಗಿ ಇದ್ದಂತೆ. ಪುರುಷರೂ ಇದಕ್ಕೆ ಕೊಡುಗೆ ಕೊಡಬೇಕು.

ಯಾವುದೇ ಕಾರಣಕ್ಕೂ ತಮ್ಮ ಪಾಲಿನ ಭೂಮಿ ಮಾರಾಟ ಮಾಡದಂತೆ ಮನೆಯ ಪುರುಷರಿಗೆ ಮಹಿಳೆಯರು ಬುದ್ಧಿ ಮಾತು ಹೇಳಬೇಕು. ಏಕೆಂದರೆ ಭೂಮಿಯ ಬೆಲೆ ಹೆಚ್ಚಾಗಿದೆ. ನಾನು ಮೊದಲ ಬಾರಿಗೆ ಇಲ್ಲಿ ಚುನಾವಣೆಗೆ ನಿಂತಾಗ, ಒಂದು ಎಕರೆಗೆ ಎರಡರಿಂದ ಮೂರು ಲಕ್ಷ ಮಾತ್ರ ಇತ್ತು. ಈಗ 50 ಲಕ್ಷ ಬೆಲೆಬಾಳುತ್ತದೆ ಎಂದು ಡಿ ಕೆ ಶಿವಕುಮಾರ್‌ ಹೇಳಿದರು.

ನನಗೆ ಯುವಕರು ಹಾಗೂ ಮಹಿಳೆಯರ ಮೇಲೆ ನಂಬಿಕೆ ಹೆಚ್ಚು. ಪಕ್ಷ ಅಧಿಕಾರಕ್ಕೆ ಬಂದರೆ ಇವರಿಗೆ ಸಹಾಯ ಮಾಡಬೇಕು ಎಂಬುದು ನನ್ನ ಅಭಿಲಾಷೆಯಾಗಿತ್ತು. ನಾನು ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾದಾಗ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಭರವಸೆ ನೀಡಲಾಯಿತು. ಅದೇ ರೀತಿ ಅಧಿಕಾರಕ್ಕೆ ಬಂದ ತಕ್ಷಣ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿದರು.

ಕನಕಾಂಬರಿ ಮಹಿಳಾ ಒಕ್ಕೂಟದ ಗೌರವ ಅಧ್ಯಕ್ಷ ಶ್ರೀಕಂಠು ಅವರ ನೇತೃತ್ವದಲ್ಲಿ ನಿಮಗೆ ಕೆನರಾ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಇವುಗಳನ್ನು ನೀವು ಬಳಸಿಕೊಂಡು ಉತ್ತಮ ಮಟ್ಟಕ್ಕೆ ಬೆಳೆದಿದ್ದೀರಿ ಎನ್ನುವುದು ನನ್ನ ಭಾವನೆ. ಸಾಲ ತೆಗೆದುಕೊಂಡವರು ಉತ್ತಮವಾಗಿ ಪಾವತಿ ಮಾಡುತ್ತಿದ್ದೀರಿ ಎಂಬುದನ್ನು ನಾನು ಕೇಳಲ್ಪಟ್ಟೆ. ಈ ಸಂಸ್ಥೆಯಿಂದ ಸಾಲವನ್ನು ಪಡೆದವರು ತಮ್ಮ ಬದುಕನ್ನು ಗಟ್ಟಿಯಾಗಿ ಕಟ್ಟಿಕೊಳ್ಳಬೇಕು. ಕೇವಲ ಸಾಲ ಪಡೆಯುವವರಾಗಬಾರದು. ನೀವು ಸಾಲ ಪಡೆದು ಸ್ವಂತ ಉದ್ಯೋಗವನ್ನು ಕಟ್ಟಿ ನಾಲ್ಕು ಜನಕ್ಕೆ ಉದ್ಯೋಗ ಸೃಷ್ಟಿ ಮಾಡಬೇಕು.

ಬಿಸಿ ಬಿಸಿ ಸುದ್ದಿ

ಕ್ರಿಕೆಟ್ ಲೈವ್ ಸ್ಕೋರ್

ಚಿನ್ನ ಮತ್ತು ಬೆಳ್ಳಿ ಬೆಲೆಗಳು