ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಿನ್ನಮತ, ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಖಾಡಕ್ಕಿಳಿದಿದ್ದು, ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
ಶುಕ್ರವಾರ ನಗರದ ಹೋಟೆಲ್ವೊಂದರಲ್ಲಿ ಪಕ್ಷದ ಮಾಜಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರದಿಂದ ಪಕ್ಷದ ಮುಖಂಡರೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಲಾಗಿದೆ. ಮುಂದಿನ ವಾರದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಲಾಗುವುದು. ಪ್ರತಿ ದಿನ 2 ಜಿಲ್ಲೆಯಂತೆ ಪ್ರವಾಸ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪ್ರವಾಸದ ವೇಳೆ ಸಾರ್ವಜನಿಕ ಸಭೆ ನಡೆಸುವುದಿಲ್ಲ. ಬದಲಿಗೆ ಕಾರ್ಯಕರ್ತರನ್ನು ಸೇರಿಸಿ ಚರ್ಚೆ ನಡೆಸಲಾಗುವುದು. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸನ್ನದ್ದಗೊಳಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗುವುದು. ಸುಮಾರು 500-600 ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗುವುದು. ದಿನಕ್ಕೆ ಎರಡು ಜಿಲ್ಲೆಗಳಿಗೆ ಭೇಟಿ ನೀಡುವ ಚಿಂತನೆಗಳಿದ್ದು, ಈ ಕುರಿತ ದಿನಾಂಕಗಳನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಹೇಳಿದರು.
ಇನ್ನು ಸಭೆ ಕುರಿತು ಮಾತನಾಡಿದ ವಿಜಯೇಂದ್ರ ಅವರು ಯಡಿಯೂರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರು 2023 ರ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳು, ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಿಗೆ ಮುಂಚಿತವಾಗಿ ಪಕ್ಷವನ್ನು ಬಲಪಡಿಸುವ ಕ್ರಮಗಳ ಕುರಿತು ಚರ್ಚಿಸಿದ್ದೇವೆಂದು ಹೇಳಿದರು.
ಕಾಂಗ್ರೆಸ್ನ ಡಿನ್ನರ್ ಪಾಲಿಟಿಕ್ಸ್ ಬಗ್ಗೆ ಮಾತನಾಡಿ, ಡಿಕೆ ಶಿವಕುಮಾರ್ ಅವರು ಬೆಳಗಾವಿಯ ಅಧಿವೇಶನದಲ್ಲಿ ಒಂದು ಮಾತು ಹೇಳಿದ್ದಾರೆ. ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸ್ಥಾನ ಸಿಗದಿದ್ದ ವೇಳೆ ಅಧಿಕಾರ ಸಿಗದಿದ್ದರೆ ಒದ್ದು ಕಿತ್ಕೋಬೇಕು ಎಂದು ಅವರ ಗುರುಗಳು ಹೇಳಿದ್ದರು ಎಂದು ಹೇಳಿದ್ದರು. ಅದನ್ನು 15 ವರ್ಷಗಳ ಬಳಿಕ ಡಿಕೆ ಶಿವಕುಮಾರ್ ಅವರು ಸದನದ ಒಳಗಡೆ ನೆನಪು ಮಾಡಿಕೊಂಡಿದ್ದಾರೆ. ಆ ಮಾತಿನ ಮರ್ಮ ನಿಮಗೂ ಗೊತ್ತಿದೆ. ಇದರ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಪವರ್ ಶೇರಿಂಗ್ ಫಾರ್ಮುಲಾ ಅಂತ್ಯಗೊಂಡಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿದೆ.
ಆದ್ದರಿಂದ ಸಿದ್ದರಾಮಯ್ಯನವರು ದಾಳ ಉರುಳಿಸುತ್ತಿದ್ದಾರೆ. ಬೇರೆ ಬೇರೆ ಸಚಿವರ ಮೂಲಕ ಡಿನ್ನರ್ ಪಾಲಿಟಿಕ್ಸ್ ಮಾಡಿಸುತ್ತಿದ್ದಾರೆ. ಇದರಿಂದ ಸಿದ್ದರಾಮಯ್ಯನವರ ಆಟ ಪ್ರಾರಂಭ ಆಗಿದೆ ಎಂಬುದು ಜಗಜ್ಜಾಹೀರಾಗಿದೆ. ಇತ್ತ ಡಿಕೆ ಶಿವಕುಮಾರ್ ಕೂಡ ಅಧಿಕಾರವನ್ನು ಒದ್ದು ಕಿತ್ತುಕೊಳ್ಳಲು ತಯಾರಾಗಿದ್ದಾರೆ. ಆಡಳಿತ ಪಕ್ಷದ ಜಗಳವನ್ನು ಜನ ನೋಡಲಿದ್ದಾರೆ ಎಂದರು.