ಮಹಾರಾಷ್ಟ್ರದಲ್ಲಿ ಔರಂಗಜೇಬ(Aurangzeb)ನ ಸಮಾಧಿಯ ಕುರಿತು ನಡೆಯುತ್ತಿರುವ ವಿವಾದ ಸೋಮವಾರ ಹಿಂಸಾತ್ಮಕ ತಿರುವು ಪಡೆದುಕೊಂಡಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ನಾಗ್ಪುರದ ಮಹಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಎರಡೂ ಕಡೆಯಿಂದ ಕಲ್ಲು ತೂರಾಟ, ಧ್ವಂಸ ಮತ್ತು ವಾಹನಗಳಿಗೆ ಬೆಂಕಿ ಹಚ್ಚುವ ಕೃತ್ಯಗಳು ನಡೆದವು.
ನಾಗ್ಪುರ, ಮಾರ್ಚ್ 18: ನಾಗ್ಪುರದಲ್ಲಿ ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis) ಜನರಲ್ಲಿ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಔರಂಗಜೇಬ(Aurangzeb)ನ ಸಮಾಧಿಯ ಕುರಿತು ನಡೆಯುತ್ತಿರುವ ವಿವಾದ ಸೋಮವಾರ ಹಿಂಸಾತ್ಮಕ ತಿರುವು ಪಡೆದುಕೊಂಡಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ನಾಗ್ಪುರದ ಮಹಲ್ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ಎರಡೂ ಕಡೆಯಿಂದ ಕಲ್ಲು ತೂರಾಟ, ಧ್ವಂಸ ಮತ್ತು ವಾಹನಗಳಿಗೆ ಬೆಂಕಿ ಹಚ್ಚುವ ಕೃತ್ಯಗಳು ನಡೆದವು. ಅಶಿಸ್ತಿನ ಗುಂಪನ್ನು ಚದುರಿಸಲು ಪೊಲೀಸರು ಬಲಪ್ರಯೋಗ ಮಾಡಬೇಕಾಯಿತು.
ಕಲ್ಲು ತೂರಾಟಗಾರರನ್ನು ತಡೆಯಲು ಪ್ರಯತ್ನಿಸುತ್ತಿದ್ದಾಗ ಪೊಲೀಸರೂ ಗಾಯಗೊಂಡರು. ಕಲ್ಲು ತೂರಾಟದಲ್ಲಿ 8 ರಿಂದ 10 ಪೊಲೀಸರು ಗಾಯಗೊಂಡಿದ್ದಾರೆ. ಬೆಂಕಿ ನಂದಿಸಲು ಬಂದ ನಾಲ್ವರು ಅಗ್ನಿಶಾಮಕ ದಳದ ಸಿಬ್ಬಂದಿಯೂ ಗಾಯಗೊಂಡಿದ್ದಾರೆ. ನಿನ್ನೆಯ ಘಟನೆಯ ನಂತರ ನಾಗ್ಪುರದಲ್ಲಿ ಈಗ ಉದ್ವಿಗ್ನ ವಾತಾವರಣ ನೆಲೆಸಿದೆ.
ಮಹಲ್ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸರು ಮನೆ ಮನೆಗೆ ತೆರಳಿ ನಡೆಸಿದ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ಸುಮಾರು 50 ಜನರನ್ನು ಬಂಧಿಸಿದ್ದಾರೆ. ಏತನ್ಮಧ್ಯೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ನಾಗ್ಪುರದ ಜನರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ನಾಗ್ಪುರದ ಎಲ್ಲಾ ಜನರು ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಲಿಸಬೇಕೆಂದು ನಾನು ವಿನಂತಿಸುತ್ತೇನೆ.
ನಾಗ್ಪುರ ನಗರವು ಜನರು ಸಾಮರಸ್ಯದಿಂದ ವಾಸಿಸುವ ನಗರ. ಆದ್ದರಿಂದ, ಯಾರೂ ಶಾಂತಿಯನ್ನು ಭಂಗಗೊಳಿಸಬಾರದು. ‘‘ಗಲಭೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾಗ್ಪುರ ಪೊಲೀಸ್ ಆಯುಕ್ತರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ಯಾರಾದರೂ ಪೊಲೀಸರ ಮೇಲೆ ದಾಳಿ ಮಾಡುತ್ತಿದ್ದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಆದ್ದರಿಂದ, ಎಲ್ಲರೂ ಶಾಂತಿ ಕಾಪಾಡುವಂತೆ ನಾನು ವಿನಂತಿಸುತ್ತೇನೆ’’ ಎಂದು ಫಡ್ನವಿಸ್ ಹೇಳಿದ್ದಾರೆ.
ನಾಗ್ಪುರದಲ್ಲಿ ಸೆಕ್ಷನ್ 144 ಜಾರಿ ನಾಗ್ಪುರ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅನಿನ್ನೆ ನಾಗ್ಪುರದ ಮಹಲ್ ಪ್ರದೇಶದಲ್ಲಿ ಸಮಾಜ ವಿರೋಧಿ ಶಕ್ತಿಗಳು ಅತಿರೇಕವಾಗಿ ಓಡಾಡುತ್ತಿದ್ದವು ಎಂದು ನಾಗ್ಪುರದ ಸ್ಥಳೀಯ ಬಿಜೆಪಿ ಶಾಸಕ ಪ್ರವೀಣ್ ದಾಟ್ಕೆ ಹೇಳಿದ್ದಾರೆ.
ಘಟನೆ ಏನು? ಸೋಮವಾರ ನಾಗ್ಪುರದ ಮಹಲ್ ಗಾಂಧಿ ಗೇಟ್ ಸಂಕೀರ್ಣದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯ ಮುಂದೆ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮತ್ತು ಬಜರಂಗದಳ ಕಾರ್ಯಕರ್ತರು ಔರಂಗಜೇಬನ ಪ್ರತಿಮೆಯನ್ನು ದಹಿಸಿದಾಗ ವಿವಾದ ಆರಂಭವಾಯಿತು. ಈ ಸಂಘಟನೆಗಳು ಖುಲ್ದಾಬಾದ್ (ಛತ್ರಪತಿ ಸಂಭಾಜಿನಗರ) ದಲ್ಲಿರುವ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದರು.